ಬಳ್ಳಾರಿ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಕಾರ್ಯಕ್ರಮದಲ್ಲಿ ಭಾಗಿ
ಬಳ್ಳಾರಿ, ಆ.9: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವರಾಜ್ಯಕ್ಕಾಗಿ ಮತ್ತು ಸ್ವಾತಂತ್ರ್ಯಾನಂತರ ದೇಶ ಕಟ್ಟುವಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆ ಅನನ್ಯವಾದ್ದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಭಾರತ ಬಿಟ್ಟು ತೊಲಗಿ ದಿನದ ಕಾರ್ಯಕ್ರಮದಲ್ಲಿ ಹುತಾತ್ಮ ಸ್ವಾತಂತ್ರ್ಯ ಸೇನಾನಿಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀ, ಜವಾಹರಲಾಲ್ ನೆಹರೂ, ಸರ್ದಾರ್ ಪಟೇಲ್, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಅಸಂಖ್ಯಾತ ಕಾಂಗ್ರೆಸಿಗರು ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ ಎಂದರು.
ಪಕ್ಷದ ಸಂಘಟನೆಗೆ ಶ್ರಮಿಸಲು ಕರೆ:
ಪಕ್ಷ ತಾಯಿಯಿದ್ದಂತೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಪಕ್ಷದ ಹಿತಕ್ಕಾಗಿ, ಪಕ್ಷದ ಸಂಘಟನೆಗಾಗಿ ಶ್ರಮಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜಾಗಬೇಕು ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡದಿದೆ. 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಜನರು ಬಡತನದಿಂದ ಮೇಲೆ ಬಂದಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದರು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಮ ಪ್ರಶಾಂತ್ ಹಾಗೂ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಆಂಜನೇಯಲು ಹಾಗೂ ಕಾಂಗ್ರೆಸ್ ಮುಖಂಡರಾದ ಮಹಮದ್ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

