KRGRV
Sunday, September 6, 2026
Homeಜಿಲ್ಲಾ ಸುದ್ದಿಗಳುಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ: ಚಿದಾನಂದ ಸವದಿ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ: ಚಿದಾನಂದ ಸವದಿ

ಅಥಣಿ: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಉತ್ತಮ ಮೌಲ್ಯಗಳು ಹಾಗೂ ದೇಶಪ್ರೇಮ ಬೆಳೆಸುವ ಮೂಲಕ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಚಿದಾನಂದ ಸವದಿ ಹೇಳಿದರು.

ಅವರು ಶನಿವಾರ ಅಥಣಿ ತಾಲೂಕಿನ ಸುಕ್ಷೇತ್ರ ಗಚ್ಚಿನ ಮಠದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಥಣಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು.

‘ಗುರು ಬ್ರಹ್ಮ, ಗುರು ವಿಷ್ಣು’ ಎಂಬ ಮಾತಿನಂತೆ ಶಿಕ್ಷಕರು ಮಕ್ಕಳಿಗೆ ಜ್ಞಾನ ನೀಡುವುದರ ಜತೆಗೆ ಉತ್ತಮ ಸಂಸ್ಕಾರ ಹಾಗೂ ದೇಶಪ್ರೇಮ ಬೆಳೆಸುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದ ಬಡ ಕುಟುಂಬಗಳ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸುವಲ್ಲಿ ಶಿಕ್ಷಕರ ಪರಿಶ್ರಮವೂ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿ ಶಿಕ್ಷಕರ ಸೇವೆಯನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಸಮಾಜ ಮುಖಿಯಾಗಿ ಬೆಳೆಯಲು ಕಾರಣೀಭೂತರಾಗಿರುವವರು ಶಿಕ್ಷಕರು. ಅವರ ಸೇವೆ ಅತ್ಯಂತ ಶ್ರೇಷ್ಠವಾದುದು. ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ನಡೆಯುವ ಕಾರ್ಯಕ್ರಮಗಳಲ್ಲಿ ಅನ್ನಪ್ರಸಾದದ ವ್ಯವಸ್ಥೆಯನ್ನು ತಾವೇ ಸ್ವತಃ ಮಾಡುವುದಾಗಿ ಚಿದಾನಂದ ಸವದಿ ಹೇಳಿದರು.

ಅಥಣಿ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಆಶಯದಂತೆ ಕ್ಷೇತ್ರದಲ್ಲಿ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಥಣಿ ನಗರ ಸೇರಿದಂತೆ ಕ್ಷೇತ್ರದಲ್ಲಿ ಸುಮಾರು ಒಂಬತ್ತು ಪ್ರೌಢಶಾಲೆಗಳನ್ನು ಆರಂಭಿಸ ಲಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಶಿಕ್ಷಕರು ದೇಶದ ಭವಿಷ್ಯ ನಿರ್ಮಾಣ ಮಾಡುವ ಶಿಲ್ಪಿಗಳು. ಮಕ್ಕಳಿಗೆ ಎರಡನೇ ತಾಯಿಯಂತೆ ಮಾರ್ಗದರ್ಶನ ನೀಡುವ ಶಿಕ್ಷಕರು ವ್ಯಕ್ತಿಯಲ್ಲ, ಒಂದು ಶಕ್ತಿ ಎಂದು ಶ್ರೀ ಮ.ನಿ.ಪ್ರ. ಶಿವಬಸವ ಸ್ವಾಮೀಜಿ ಹೇಳಿದರು. ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಉಪನ್ಯಾಸಕ ಪ್ರಕಾಶ ಮಾಸ್ತಿಹೊಳಿ ಅವರು ಶಿಕ್ಷಕರ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಅವರ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವಿಸಲಾಯಿತು. ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಅವರ ದೀರ್ಘಕಾಲದ ಸೇವೆಯನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಶಿಂಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ, ಕ್ಷೇತ್ರ ಸಮನ್ವಯ ಅಧಿಕಾರಿ ಗೌಡಪ್ಪ ಖೋತ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ, ಎಂ.ವಿ. ನಾಮದಾರ, ಎಸ್.ಬಿ. ಕರೋಶಿ, ತುಕಾರಾಮ ಬಾಗೆನ್ನವರ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರು ಉಪಸ್ಥಿತರಿದ್ದರು.
ವರದಿ:ಯಾಸಿನ ಝಾರೆ,
ಅಥಣಿ

ಹೆಚ್ಚಿನ ಸುದ್ದಿ