ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪೊಲೀಸ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯ ಸಂಖ್ಯೆಗಳಲ್ಲಿ ವ್ಯತ್ಯಾಸ ಇರುವ ಕುರಿತು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಶ್ನೆ ಮಾಡಿದ್ದೇನೆ. ಆದರೆ ಉತ್ತರ ನೀಡುವ ಬದಲು ಅಧಿಕಾರದ ದರ್ಪ ಪ್ರದರ್ಶಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,” ಎಂದು ಆರೋಪಿಸಿದರು.
ಪೊಲೀಸ್ ನೇಮಕಾತಿ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಹೊತ್ತು ಹಾಜರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಬದಲು, ಲಾಠಿಚಾರ್ಜ್ ಮಾಡುವ ಎಚ್ಚರಿಕೆ ನೀಡಿರುವುದು ಖಂಡನೀಯ.
ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಭ್ಯರ್ಥಿಗಳ ಅನುಮಾನಗಳನ್ನು ಪಾರದರ್ಶಕವಾಗಿ ನಿವಾರಿಸಬೇಕು. ಪ್ರಶ್ನೆ ಕೇಳುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ರುದ್ರಯ್ಯ ಹರಿಹಾಯ್ದರು.
ಈ ಸಂದರ್ಭದಲ್ಲಿ ಆನಂದ್ ಪಾಟೀಲ್ ನರಬೊಳ್ಳಿ ಸಂಗಮೇಶ ಪಾಟೀಲ್ ಉಪಸ್ಥಿತಿಯಲ್ಲಿದ್ದರು

