ಬೆಂಗಳೂರು, ಆಗಸ್ಟ್ 11(ಕರ್ನಾಟಕ ವಾರ್ತೆ):
ಸ್ವಯಂಪ್ರೇರಿತ ರಕ್ತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಜೀವ ಉಳಿಸುವ ಮಾನವೀಯ ಕಾರ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಲಹರಿ ಅಡ್ವೊಕೇಟ್ಸ್ ಫೋರಂ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 9.15 ಗಂಟೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ ಶಿಬಿರದಲ್ಲಿ ರಕ್ತದಾನಕ್ಕೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಫೋರಂ ತಿಳಿಸಿದೆ.
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಕ್ತದಾನವು ಅಗತ್ಯವಿರುವ ರೋಗಿಗಳ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ರಕ್ತದಾನದ ಕುರಿತು ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವಂತೆ ಪ್ರೇರೇಪಿಸುವುದು ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

